Shubhashaya News

ಸಹಿ ಸಂಗ್ರಹ ಹೆಸರಿನಲ್ಲಿ ಜನರಿಗೆ ವಂಚನೆ- ಬಿಜೆಪಿ ಆರೋಪ

ಮತಗಳ್ಳತನದ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರು ಸಹಿ ಸಂಗ್ರಹ ಅಭಿಯಾನದ ಹೆಸರಿನಲ್ಲಿ ಜನಸಾಮಾನ್ಯರಿಗೆ ಆಮಿಶವೊಡ್ಡಿ ಸಹಿ ಮಾಡಿಕೊಳ್ಳುತ್ತಿದ್ದಾರೆ ಎಂದು ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ಮತಕ್ಷೇತ್ರದ ವ್ಯಾಪ್ತಿಯ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ವಸತಿ ಯೋಜನೆಯಡಿ ಮನೆ ನಿರ್ಮಾಣ, ಸಬ್ಸಿಡಿ ಯೋಜನೆಗಳು ಸೇರಿದಂತೆ ಅನೇಕ ಸರ್ಕಾರಿ ಸವಲತ್ತುಗಳನ್ನು ತಮ್ಮ ತಲುಪಿಸಲಾಗುವುದು ಎಂದು ಆಮಿಶವೊಡ್ಡಿ ಸಹಿ ಸಂಗ್ರಹಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಅಲ್ಲದೇ ಸಹಿ ಮಾಡದಿದ್ದರೇ ತಾವು ಈಗಾಗಲೇ ಫಲಾನುಭವಿಗಳಾಗಿರುವ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ರದ್ದುಪಡಿಸುವುದಾಗಿ ಜನರಿಗೆ ಹೆದರಿಸಿ ಸಹಿ ಮಾಡಿಕೊಳ್ಳುತ್ತಿದ್ದಾರೆ ಇದು ಅಧಿಕಾರದ ಸಂಪೂರ್ಣ ದೂರುಪಯೋಗವಾಗಿದೆ ಎಂದು ತಿಳಿಸಿದ್ದಾರೆ.

ಸಂಧ್ಯಾ ಸುರಕ್ಷಾ ಯೋಜನೆ, ಬೆಳೆ ವಿಮೆ, ಪರಿಹಾರ, ಪಡಿತರ ಆಹಾರ ಧಾನ್ಯ, ಬಿಪಿಎಲ್ ಕಾರ್ಡ ರದ್ದು ಸೇರಿದಂತೆ ಅನೇಕ ಯೋಜನೆಗಳಿಂದ ತಾವು ವಂಚಿತರಾಗಲಿದ್ದೀರಿ ಅಲ್ಲದೇ ಮುಂದಿನ ದಿನಗಳಲ್ಲಿ ತಮಗೆ ಯಾವುದೇ ರೀತಿಯ ಸರ್ಕಾರದ ಯೋಜನೆಗಳು ದೊರೆಯುವುದಿಲ್ಲ ಎಂದು ಹೇಳಿ ಜನರನ್ನು ಭಯಭೀತರನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಜಿಲ್ಲಾಡಳಿತ ಮತ್ತು ತಾಲೂಕಾ ಆಡಳಿತ ಕೂಡಲೇ ಮಧ್ಯೆ ಪ್ರವೇಶಿಸಿ ಈ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇಲ್ಲದಿದ್ದರೇ ತಾಲೂಕಿನ ನಾಗರಿಕರು ಹಾಗೂ ಬಿಜೆಪಿ ಕಾರ್ಯಕರ್ತರ ಜೊತೆಗೂಡಿ ಉಗ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Comments are closed.

Don`t copy text!