Shubhashaya News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ : RCB-GT ಪಂದ್ಯ ವೇಳೆ, 240 ಸಿಸಿಟಿವಿ ಕೇಬಲ್‌ ಕಟ್‌!

ಮೊನ್ನೆ ಬೆಂಗಳೂರಲ್ಲಿ ನಗರದ ಪ್ರತಿಷ್ಠಿತ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಿರುವ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಐಪಿಎಲ್ ಪಂದ್ಯ ನಡೆಯುವ ದಿನದಂದೇ ಕ್ರೀಡಾಂಗಣದ ಪ್ರಮುಖ ಭದ್ರತಾ ವ್ಯವಸ್ಥೆಯಾದ ಸಿಸಿಟಿವಿ ಕ್ಯಾಮೆರಾಗಳ ಕೇಬಲ್‌ಗಳನ್ನು ಕತ್ತರಿಸಿ, ಇಡೀ ಭದ್ರತಾ ಜಾಲವನ್ನೇ ಅಸ್ತವ್ಯಸ್ತಗೊಳಿಸಲು ಯತ್ನಿಸಲಾಗಿದೆ.

ಹೌದು ಏಪ್ರಿಲ್ 24 ರಂದು ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ (RCB) ಮತ್ತು ಗುಜರಾತ್‌ ಟೈಟಾನ್ಸ್‌ (GT)ತಂಡಗಳ ಮಧ್ಯೆ ಐಪಿಎಲ್ ಪಂದ್ಯ ಆಯೋಜನೆಯಾಗಿತ್ತು. ಪಂದ್ಯ ನಡೆಯುವ ದಿನದಂದು ಬೆಳಿಗ್ಗೆ ಕ್ರೀಡಾಂಗಣದ ತಾಂತ್ರಿಕ ತಂಡವು ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಬರೋಬ್ಬರಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಆಫ್‌ಲೈನ್ ಆಗಿರುವುದು ಪತ್ತೆಯಾಗಿದೆ.

ಕ್ಯಾಮೆರಾಗಳು ಏಕಾಏಕಿ ಬಂದ್ ಆಗಿದ್ದರಿಂದ ತಾಂತ್ರಿಕ ತಂಡವು ತಕ್ಷಣವೇ ಕೂಲಂಕಷವಾಗಿ ತನಿಖೆ ನಡೆಸಿದೆ. ಈ ವೇಳೆ ಐವಿಎಸ್ ಡಿಜಿಟಲ್ ಸೊಲ್ಯೂಷನ್ಸ್ ಎಂಬ ಉಪ-ವಿತರಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಇ. ಮತ್ತು ಅಬ್ದುಲ್ ಕಲಾಂ ಈ ವಿಧ್ವಂಸಕ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಈ ಇಬ್ಬರು ಆರೋಪಿಗಳು ಕ್ರೀಡಾಂಗಣವನ್ನು ಪ್ರವೇಶಿಸಲು ಅಗತ್ಯವಾದ ಮಾನ್ಯ ಪಾಸ್‌ಗಳನ್ನು ಹೊಂದಿರಲಿಲ್ಲ.

ಕ್ರೀಡಾಂಗಣವನ್ನು ಪ್ರವೇಶಿಸಿದ ಆರೋಪಿಗಳು, ಎನ್‌ವಿಆರ್ (NVR) ಮತ್ತು ಆಪ್ಟಿಕಲ್ ಫೈಬರ್ ಸಂಪರ್ಕಗಳನ್ನು ಉದ್ದೇಶಪೂರ್ವಕವಾಗಿ ತಪ್ಪು ತಪ್ಪಾಗಿ ನಿರ್ವಹಿಸಿ ಅವುಗಳನ್ನು ಕತ್ತರಿಸಿ ಹಾನಿಗೊಳಿಸಿದ್ದಾರೆ. ಇದರಿಂದಾಗಿ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಂಡಿತ್ತು. ಆದರೂ ಇಬ್ಬರು ಬೆಳಿಗ್ಗೆ 11:30ರ ಸುಮಾರಿಗೆ ನಿಷ್ಕ್ರಿಯಗೊಂಡ ಹಳೆಯ ಕಾರ್ಡ್ ಬಳಸಿಕೊಂಡು ಕ್ರೀಡಾಂಗಣವನ್ನು ಅನಧಿಕೃತವಾಗಿ ಪ್ರವೇಶಿಸಿದ್ದರು.

ಆರೋಪಿಗಳು ಎಸಗಿದ ವಿಧ್ವಂಸಕ ಕೃತ್ಯದಿಂದಾಗಿ ಕ್ರೀಡಾಂಗಣದ ಅತ್ಯಂತ ಪ್ರಮುಖ ಭದ್ರತಾ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು ಸ್ಥಗಿತಗೊಂಡಿದ್ದವು.  ಅವುಗಳಲ್ಲಿ ಪ್ರಮುಖವಾಗಿ ಎಲ್ಲಾ ಪ್ರವೇಶ ದ್ವಾರಗಳು, ಕ್ರೀಡಾಂಗಣದ ಸುತ್ತಮುತ್ತಲಿನ ಕ್ಯಾಮೆರಾಗಳು, ಕಾರ್ಪೊರೇಟ್‌ ಸ್ಟ್ಯಾಂಡ್‌ ಕ್ಯಾಮೆರಾ ಬಂದ್‌ ಆಗಿತ್ತು. ಈ ಪ್ರಮುಖ ಸ್ಥಳಗಳ ಕ್ಯಾಮೆರಾಗಳು ಬಂದ್ ಆಗಿದ್ದರಿಂದ ಪಂದ್ಯದ ಸಂದರ್ಭದಲ್ಲಿ ಭದ್ರತಾ ಮೇಲ್ವಿಚಾರಣೆ ನಡೆಸಲು ಪೊಲೀಸರಿಗೆ ಅಗತ್ಯವಾದ ದತ್ತಾಂಶ ಅಥವಾ ಫೀಡ್‌ಗಳನ್ನು ಒದಗಿಸಲು ದೂರುದಾರರಿಗೆ ಸಾಧ್ಯವಾಗಲಿಲ್ಲ

Comments are closed.

Don`t copy text!