Shubhashaya News

ಕನಕದಾಸರ ತತ್ವಗಳು ಯುವಜನತೆಗೆ ಆದರ್ಶ: ರಾಜಶೇಖರ ಕಡಗನ

ಆಳಂದನ ಮಾತೋಶ್ರೀ ಪ್ರೇಮಿಳಾಬಾಯಿ ಮಾಧವರಾವ ಗುತ್ತೇದಾರ ಕನ್ಯಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜಶೇಖರ ಕಡಗನ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಆಳಂದ: ಕನಕದಾಸರು ತಮ್ಮ ಜೀವನ ಮತ್ತು ಸಾಹಿತ್ಯದ ಮೂಲಕ ಸಮಾನತೆ, ಮಾನವೀಯತೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದ ಮಹಾನ್ ಸಂತ-ಕವಿ. ಅವರ ತತ್ವಗಳು ಇಂದಿನ ಯುವಜನತೆಗೆ ಆದರ್ಶವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪನ್ಯಾಸಕ ರಾಜಶೇಖರ ಕಡಗನ ಹೇಳಿದರು.
ಶುಕ್ರವಾರ ಆಳಂದ ಪಟ್ಟಣದ ಮಾತೋಶ್ರೀ ಪ್ರೇಮಿಳಾಬಾಯಿ ಮಾಧವರಾವ ಗುತ್ತೇದಾರ ಕನ್ಯಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕಲಾನಿಕೇತನ ಟ್ರಸ್ಟ್ ಸಗರ ಸಹಯೋಗದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನಕದಾಸರು ಜಾತಿ, ಮತ, ಪಂಥಗಳ ಭೇದವನ್ನು ಮೀರಿ ಮಾನವೀಯ ಮೌಲ್ಯಗಳನ್ನು ಸಾರಿದ ಅಪರೂಪದ ದಾರ್ಶನಿಕರು. ಅವರ ಕೀರ್ತನೆಗಳು ಮತ್ತು ಕೃತಿಗಳು ಕೇವಲ ಭಕ್ತಿ ಸಾಹಿತ್ಯವಲ್ಲ, ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಬೆಳೆಸುವ ಜೀವನದರ್ಶನವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು. ಕನಕದಾಸರ ಸಾಹಿತ್ಯವನ್ನು ಓದುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಮೌಲ್ಯಗಳನ್ನು ರೂಢಿಸಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವ ಉದ್ದೇಶದಿಂದ ಇಂತಹ ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ನಿವೃತ್ತ ಉಪನ್ಯಾಸಕ ಬಾಬುರಾವ ಸರಡಗಿ ಉದ್ಘಾಟಿಸಿದರು. ಕಲಾನಿಕೇತನ ಟ್ರಸ್ಟ್ ಸಗರ ಅಧ್ಯಕ್ಷ ಬಸವರಾಜ ಶಿಣ್ಣೂರ, ವಿಶ್ವನಾಥ ಘೋಡಕೆ, ಲಕ್ಷö್ಮಣ ದೇವಂತಗಿ ಮುಖ್ಯ ಅತಿಥಿಗಳಾಗಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave A Reply

Your email address will not be published.