Shubhashaya News

‘ಜಾತಿ ಗಣತಿ’ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿರುವುದರಿಂದ ಸದ್ಯ ಯಾವುದೇ ಆದೇಶ ನೀಡಲ್ಲ : ಹೈಕೋರ್ಟ್‌ ಸ್ಪಷ್ಟನೆ

ಹಲವು ಸಮುದಾಯಗಳ ತೀವ್ರ ವಿರೋಧದ ನಡುವೆ ಫೆಬ್ರವರಿ 29 ರಂದು ಕರ್ನಾಟಕ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ ಜಾತಿಗಣತಿ ವರದಿಯನ್ನು ಸ್ವೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿ ಗಣತಿ ಕುರಿತು ಸುದೀರ್ಘ ವಿಚಾರಣೆ ನಡೆಸವ ಅಗತ್ಯವಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಯಾವುದೇ ಆದೇಶ ನೀಡಲಾಗದು ಎಂದು ಹೈಕೋರ್ಟ್‌ ತಿಳಿಸಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014 ರ ಜ. 23ರಂದು ನೀಡಿದ್ದ ಆದೇಶ ರದ್ದು ಕೋರಿ ಬೀದರ್‌ನ ಶಿವರಾಜ್‌ ಕಣಶೆಟ್ಟಿ ಮತ್ತಿತರರು ಸಲ್ಲಿಸಿರುವ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದವು.

ಈ ನಡುವೆ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಅಡ್ವೊಕೇಟ್‌ ಜನರಲ್‌ ತಿಳಿಸಿದರು. ಈ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೂ ವರದಿ ಸಂಬಂಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಬೇಕಾಗಿದೆ. ಆದ್ದರಿಂದ ತಕ್ಷಣಕ್ಕೆ ಯಾವುದೇ ಆದೇಶ ನೀಡಲಾಗದು ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮಾ.21 ಕ್ಕೆ ಮುಂದೂಡಿತು.

ಆಗ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಸರ್ಕಾರ ಫೆ.29 ರಂದು ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಮಾಣಪತ್ರದ ಮೂಲಕ ತಿಳಿಸಿದರು. ಆಗ ನ್ಯಾಯಪೀಠ, ಇದೇ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕಾಗಿದೆ ಎಂದು ತಿಳಿಸಿತು.

Comments are closed.

Don`t copy text!