ಆಳಂದ: ತಾಂಡಾಗಳಲ್ಲಿ ಅಕ್ರಮ ಸಾರಾಯಿಮಾರಾಟ ತಡೆಯುವಂತೆ ಸ್ಥಳೀಯ ಅಬ್ಕಾರಿ ಕಚೇರಿಗೆ ಬಂಜಾರಾ ಕ್ರಾಂತಿದಳ ಅಧ್ಯಕ್ಷ ರಾಜು ಚವ್ಹಾಣ ನೇತೃತ್ವದಲ್ಲಿ ಕಾರ್ಯಕರ್ತರು ಒತ್ತಾಯಿಸಿದರು.
ಆಳಂದ: ತಾಲೂಕಿನ ವಿವಿಧ ತಾಂಡಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಿರ್ಬಂಧಿಸುವAತೆ ಹಲವು ಬಾರಿ ಮೌಖಿಕ ಹಾಗೂ ಲಿಖಿತವಾಗಿ ದೂರು ಸಲ್ಲಿಸಿದರೂ ಸಂಬAಧಿತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಆಕ್ರೋಶಗೊಂಡ ಬಂಜಾರಾ ಕ್ರಾಂತಿದಳ ಕಾರ್ಯಕರ್ತರು ಪಟ್ಟಣದ ಅಬ್ಕಾರಿ ಇಲಾಖೆಯ ಕಚೇರಿಗೆ ಹಠಾತ್ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು.
ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಕ್ರಾಂತಿದಳ ರಾಜ್ಯಾಧ್ಯಕ್ಷ ರಾಜು ಚವ್ಹಾಣ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು, ವಿಶೇಷವಾಗಿ ನಿಂಬರಗಾ ತಾಂಡಾದಲ್ಲಿ ಒಂಬತ್ತು ಅಕ್ರಮ ಸಾರಾಯಿ ಅಂಗಡಿಗಳು ನಿರ್ಬಂಧವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು. ತಾಂಡಾಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಕುಡಿತದ ಚಟದಿಂದ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಹದಗೆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಖಂಡನೀಯ. ತಕ್ಷಣ ದಾಳಿ ನಡೆಸಿ ಅಕ್ರಮ ಅಂಗಡಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು. ಕಚೇರಿಯಲ್ಲಿ ಹಾಜರಿದ್ದ ಅಬ್ಕಾರಿ ಅಧಿಕಾರಿಗಳ ವಿರುದ್ಧ ಉದ್ರಿಕ್ತರು ಆಕ್ರೋಶ ಹೊರಹಾಕಿ ಮಿಂಚಿನ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ತೀವ್ರ ಎಚ್ಚರಿಕೆ ನೀಡಿದರು.
ಅಬ್ಕಾರಿ ಅಧಿಕಾರಿಗಳು ಈ ಸಂದರ್ಭದಲ್ಲಿ ಮಾತನಾಡಿ,“ದೂರು ನೀಡಿದರೆ ವಿಚಾರಣೆ ಮಾಡುತ್ತೇವೆ” ಎಂದು ಪ್ರತಿಕ್ರಿಯಿಸಿದಾಗ, ಈಗಾಗಲೇ ದೂರು ನೀಡಲಾಗಿದೆ. ಆದರೂ ಕ್ರಮ ಕೈಗೊಳ್ಳದಿರುವುದು ಏಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿ ತಕ್ಷಣ ಕಾರ್ಯಾಚರಣೆ ನಡೆಸುವಂತೆ ಪಟ್ಟು ಹಿಡಿದರು.
ಈ ವೇಳೆ ಸಂತೋಷ ಪವಾರ, ಕೋಟೇಶ ರಾಠೋಡ, ಸದಾನಂದ ಪವಾರ, ಅನಿಲ ರಾಠೋಡ, ವೆಂಕಟೇಶ ರಾಠೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Comments are closed.