ಮೂರು ವರ್ಷವಾದರೂ ಉಸ್ತುವಾರಿ ಸಚಿವ ಕೆಡಿಪಿ ಸಭೆ ನಡೆಸಿಲ್ಲ:
ವಸತಿ ಶಾಲೆಗಳಿಗೆ ಕಳಪೆ ಆಹಾರ ಪೂರೈಕೆ; ಕ್ರಮಕ್ಕೆ ಉಮೇಶ್ ಜಾಧವ್ ಆಗ್ರಹ
ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧೆಡೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಕಾರಣದಿಂದಲೇ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೂಡಲೇ ಅಂತಹ ಆಹಾರ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ದಾ.ಉಮೇಶ್ ಜಾಧವ್ ಆಗ್ರಹಿಸಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಕರಜಗಿ ವಸತಿ ಶಾಲೆಗೆ ಭೇಟಿ ನೀಡಿದ್ದೇವೆ. ಅಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗಿದ್ದು, ಹುಳಗಳು ಸಹ ಪತ್ತೆಯಾಗಿವೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮುಖ್ಯ ಗುರುಗಳನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳಿಗೆ ನೀಡುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ ಸಾಧ್ಯವಾಗುತ್ತಿರುವಾಗ, ಸರ್ಕಾರಿ ವಸತಿ ನಿಲಯಗಳು ಹಾಗೂ ಶಾಲೆಗಳಲ್ಲಿ ಕಳಪೆ ಆಹಾರ ಪೂರೈಕೆಯಾಗುತ್ತಿರುವುದು ಆತಂಕಕಾರಿ ಎಂದ ಅವರು, ಇಷ್ಟೆಲ್ಲಾ ಘಟನೆಗಳು ಸಂಭವಿಸುತ್ತಿದ್ದರೂ ಉಸ್ತುವಾರಿ ಸಚಿವರು ಕಲಬುರಗಿಗೆ ಕಾಲಿಟ್ಟಿಲ್ಲ ಎಂದು ಟೀಕಿಸಿದರು.
ಕಳಪೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗಾಣಗಾಪುರದಲ್ಲಿ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದು ಅವರು ಹೇಳಿದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಇಂತಹ ಘಟನೆಗಳು ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವುದರಿಂದ ಬಿತ್ತನೆ ಮಾಡಿದ ರೈತರ ಬೀಜವೂ ಮೊಳಕೆಯ ಹಂತದಲ್ಲೇ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ರೈತರು ಸಾಲದ ಹಣದಲ್ಲಿ ಜೀವನ ಸಾಗಿಸುತ್ತಿದ್ದು, ಮಕ್ಕಳ ಶಿಕ್ಷಣದ ವೆಚ್ಚ ಭರಿಸಲೂ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಬರಪೀಡಿತದಿಂದಾಗಿ ರೈತರು ಕಂಗೆಟ್ಟು ಹೋಗಿದ್ದಾರೆ, ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇನ್ನೂ ಯಾವುದೇ ತಾಲೂಕಿಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದ ಅವರು, ಕಳೆದ ಮೂರು ವರ್ಷಗಳಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ಕೆಡಿಪಿ) ಸಭೆ ನಡೆದಿಲ್ಲ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮತ್ತು ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿಯಮಿತವಾಗಿ ಕೆಡಿಪಿ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.
ಮಳೆ ಮಾಪಕಗಳ ಅಳವಡಿಕೆ ಹಾಗೂ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿ ಮುಖಂಡ ನಿತಿನ್ ಗುತ್ತೇದಾರ್ ಮಾತನಾಡಿ, ಜಿಲ್ಲೆಯ ಪ್ರಮುಖ ಕಾಮಗಾರಿಗಳನ್ನು ಪದೇಪದೇ ಕೆಆರ್ಐಡಿಎಲ್ಗೆ ನೀಡಲಾಗುತ್ತಿದ್ದು, ಕೆಡಿಪಿ ಸಭೆಗಳು ನಡೆಯದ ಕಾರಣ ಕಾಮಗಾರಿಗಳ ಪ್ರಗತಿ ಮತ್ತು ಹಣಕಾಸಿನ ಬಳಕೆಯ ಕುರಿತು ಸಮರ್ಪಕ ಮೇಲ್ವಿಚಾರಣೆ ಇಲ್ಲದಂತಾಗಿದೆ ಎಂದು ದೂರಿದರು.
ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆ ಹದಗೆಟ್ಟಿದ್ದು, ಪೌಷ್ಟಿಕ ಆಹಾರ ಪೂರೈಕೆಯಲ್ಲಿಯೂ ಅಕ್ರಮಗಳು ನಡೆದಿವೆ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಶರಣಪ್ಪ ತಳವಾರ, ಮಹಾದೇವ ಬೆಳಮಗಿ, ಆನಂದ ಪಾಟೀಲ್, ಲಿಂಗರಾಜ ಬಿರಾದಾರ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.