ಕೋವಿಡ್ ನಿಯಂತ್ರಣಕ್ಕೆ ಸ್ಥಳೀಯ ಮಟ್ಟದಲ್ಲಿ ಕ್ರಮಕೈಗೊಳ್ಳಿ
ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬಿರುವ ಕೋವಿಡ್ ನಿಯಂತ್ರಣಕ್ಕೆ ಸ್ಥಳೀಯ ಮಟ್ಟದಲ್ಲಿ ಕ್ರಮಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಆಳಂದ ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಆಳಂದ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಕೋವಿಡ್ 19 ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ಮತ್ತು ಸಾರ್ವಜನಿಕರ ಕುಂದುಕೊರತೆ ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆ ಸಾಧಿಸಿ ಕೋರೋನಾ ನಿಯಂತ್ರಣಕ್ಕೆ ಶ್ರಮಿಸಬೇಕು ಹಾಗೂ ಸೋಂಕಿನ ಲಕ್ಷಣ ಕಂಡು ಬಂದವರನ್ನು ಮನೆಯಲ್ಲಿ ಹೋಂ ಐಸೋಲೇಶನ್ ಮಾಡದೇ ಸ್ಥಳೀಯವಾಗಿ ಲಭ್ಯವಿರುವ ಸರ್ಕಾರಿ ಸ್ಥಳಗಳನ್ನು ಬಳಸಿಕೊಂಡು ಅವರಿಗೆ ಉಪಚಾರ ಮಾಡಬೇಕು. ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದರೆ ವೈದ್ಯರ ಸಲಹೆ ಮೇರೆಗೆ ತಾಲೂಕಾ, ಜಿಲ್ಲಾ ಆಸ್ಪತ್ರೆಗೆ ಶಿಫಾರಸ್ಸು ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಎಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಈಗಾಗಲೇ 12 ಆಕ್ಸಿಜನ್ ಕಾನ್ಸಂಟ್ರೆಂಟರ್ ಖರೀದಿಸಿದ್ದು 5 ಈಗಾಗಲೇ ಆಳಂದ ಪಟ್ಟಣಕ್ಕೆ ಬಂದಿವೆ ಅದರ ಕಾರ್ಯಕ್ಷಮತೆಯನ್ನು ನೋಡಿ 1000 ಸಾವಿರ ಆಕ್ಸಿಜನ್ ಕಾನ್ಸಂಟ್ರೆಂಟರ್ ತರುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆಕ್ಸಿಜನ್ ಜನರೇಟರ್ ಕೇಂದ್ರಗಳನ್ನು ತೆರೆಯುವಂತೆ ಮಾಡಲಾಗುವುದು ಅಲ್ಲದೇ ಹೆಚ್ಚಿನ ಸಿಲಿಂಡರಗಳನ್ನು ಖರೀದಿ ಮಾಡಿ ಪ್ರತಿ ತಾಲೂಕಿಗೆ ದೊರೆಯುವಂತೆ ಹಂಚಿಕೆ ಮಾಡಲಾಗುವುದು. ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗಾಗಿ ಈಗಾಗಲೇ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸಿದ್ದಾರೆ ಆ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು.
ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಮಾಜದ ಮುಖ್ಯ ವಾಹಿನಿಯಲ್ಲಿ ಕೆಲಸ ಮಾಡುವವರನ್ನು ಬಳಿಸಿಕೊಂಡು ಜಾಗೃತಿ ಮೂಡಿಸುವ ಕೆಲಸ ವ್ಯಾಪಕವಾಗಿ ಮಾಡಬೇಕು ಈ ರೀತಿ ಮಾಡಿದರೇ 3ನೇ ಅಲೆಯನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಂಸದರಾದ ಭಗವಂತ ಖೂಬಾ, ಡಾ. ಉಮೇಶ ಜಾಧವ, ಶಾಸಕ ಸುಭಾಷ್ ಆರ್ ಗುತ್ತೇದಾರ, ಎಮ್ಎಲ್ಸಿ ಬಿ ಜಿ ಪಾಟೀಲ, ಮಾಜಿ ಎಮ್ಎಲ್ಸಿ ಅಮರನಾಥ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿ.ಪಂ ಹರ್ಷಾನಂದ ಗುತ್ತೇದಾರ, ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರೆ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ, ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ತಹಸೀಲದಾರ ಯಲ್ಲಪ್ಪ ಸುಬೇದಾರ, ತಾ. ಪಂ ಇಒ ನಾಗಮೂರ್ತಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸರ್ಕಲ್ ಇನ್ಸಪೆಕ್ಟರ್ ಮಂಜುನಾಥ, ಆರೋಗ್ಯ ಅಧಿಕಾರಿ ಡಾ. ಅಭಯಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.