Shubhashaya News

ಸಾಹಿತಿ ಧನ್ನಿಗೆ ‘ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ಪ್ರದಾನ

ಕಲಬುರಗಿ: ಬೆಂಗಳೂರಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕಲಬುರಗಿಯ ಕನ್ನಡ ಭವನದಲ್ಲಿ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಸಾಹಿತಿ, ಕವಿ ಧರ್ಮಣ್ಣ ಎಚ್. ಧನ್ನಿ ಅವರಿಗೆ ಪ್ರತಿಷ್ಠಿತ ‘ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ, ಭಾಷೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಧನ್ನಿ ಅವರು ಸಲ್ಲಿಸುತ್ತಿರುವ ಗಮನಾರ್ಹ ಸೇವೆ ಮತ್ತು ಸಾಹಿತ್ಯಿಕ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಧರ್ಮಣ್ಣ ಧನ್ನಿ ಅವರಿಗೆ ಗಣ್ಯರು ಅಭಿನಂದನೆ ಸಲ್ಲಿಸಿ, ಅವರ ಸಾಹಿತ್ಯ ಸೇವೆ ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಮಂಜುಳಾ ಪಾವಗಡ ಅವರು ಉಪಸ್ಥಿತರಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಸಂಶೋಧನಾ ಸಾಹಿತಿ ಮುಡುಬಿ ಗುಂಡೇರಾವ ಸೇರಿದಂತೆ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಸಾಹಿತಿಗಳು ಹಾಗೂ ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಶಸ್ತಿ ಪ್ರದಾನದ ಸಂದರ್ಭದಲ್ಲಿ ಧರ್ಮಣ್ಣ ಧನ್ನಿ ಅವರ ಸಾಹಿತ್ಯ ಸೇವೆಯನ್ನು ಗಣ್ಯರು ಸ್ಮರಿಸಿ, ಕನ್ನಡ ನಾಡು-ನುಡಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವು ಕನ್ನಡ ಸಾಹಿತ್ಯಾಭಿಮಾನಿಗಳ ಗಮನ ಸೆಳೆಯಿತು.

Leave A Reply

Your email address will not be published.