ಕಲಬುರಗಿ: ರೈಲಿನ ಎಂಜಿನ್ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾದ ಎಲ್ಲ ಅಭ್ಯರ್ಥಿಗಳಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಡಿವೈಎಫ್ಐ ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ, ಜಿಲ್ಲಾ ಅಧ್ಯಕ್ಷ ಡಾ.ಸಮೀನಾ ಹಾಗೂ ಜಿಲ್ಲಾ ಕಾರ್ಯದರ್ಶಿ ಪ್ರಮೋದ ಪಾಂಚಾಳ ಅವರು, ಈಗಾಗಲೇ ಪರೀಕ್ಷಾ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಂದ ಮರುಪರೀಕ್ಷೆಗಾಗಿ ಯಾವುದೇ ಹೆಚ್ಚುವರಿ ಶುಲ್ಕ ಪಡೆಯಬಾರದು. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳನ್ನು ಗುರುತಿಸಿ, ಅವರ ಅರ್ಹತೆಗೆ ಯಾವುದೇ ಧಕ್ಕೆಯಾಗದಂತೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು. ಮರುಪರೀಕ್ಷೆಯ ದಿನಾಂಕ, ಸಮಯ ಹಾಗೂ ಪರೀಕ್ಷಾ ಕೇಂದ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೂಡಲೇ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೆಇಎ ವತಿಯಿಂದ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ ನೇಮಕಾತಿಗೆ ನಡೆಯುತ್ತಿದ್ದ ಪರೀಕ್ಷೆಗೆ ಹಾಜರಾಗಲು ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಅಭ್ಯರ್ಥಿಗಳು ವಿಜಯಪುರ-ಯಶವಂತಪುರ (16548) ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ರೈಲಿನ ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ನಾಲ್ಕು ಗಂಟೆಗೂ ಅಧಿಕ ಕಾಲ ರೈಲು ವಿಳಂಬವಾದ ಪರಿಣಾಮ ನೂರಾರು ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರ ತಲುಪಲಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.